ಭೂಸ್ವಾಧೀನ ಮಾಡಿರುವ ಜಮೀನನ್ನು ಪುನಹ ಸರ್ವೆ ಮಾಡುವಂತೆ ಜಿಲ್ಲಾಧಿಕಾರಿ ಸೂಚನೆ

ಭೂಸ್ವಾಧೀನ ಮಾಡಿರುವ ಜಮೀನನ್ನು ಪುನಹ ಸರ್ವೆ ಮಾಡುವಂತೆ ಜಿಲ್ಲಾಧಿಕಾರಿ ಸೂಚನೆ
 ರಾಷ್ಟ್ರೀಯ ಹೆದ್ದಾರಿ 373 ವಿಸ್ತರಣೆಯಲ್ಲಿ ಭೂಸ್ವಾಧೀನ ಮಾಡಿಕೊಂಡಿರುವ ರೈತರ ಜಮೀನನ್ನು ಪುನಹ ಸರ್ವೆ ಮಾಡಿ ಕಾನೂನಾತ್ಮಕವಾಗಿದ್ದರೆ ಪರಿಹಾರ ನೀಡಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ರಾಷ್ಟ್ರೀಯ ಹೆದ್ದಾರಿ 373 ವಿಸ್ತರಣೆಯಲ್ಲಿ ಭೂಸ್ವಾಧೀನ ಹಾಗೂ ಪರಿಹಾರ ಕುರಿತು ಸಭೆ ನಡೆಸಿ ಮಾತನಾಡಿದ ಅವರು ರಾಷ್ಟ್ರೀಯ ಹೆದ್ದಾರಿಗೆ ಸರ್ಕಾರ ಮೀಸಲಿರಿಸಿದ ಜಾಗವನ್ನು ಸ್ವಾದೀನಪಡಿಸಿಕೊಳ್ಳಲಾಗುವುದು. ರಸ್ತೆ ಕಾಮಗಾರಿಯಲ್ಲಿ ಕಾನೂನಾತ್ಮಕವಾಗಿ ಜಮೀನು ಕಳೆದುಕೊಂಡವರ ದಾಖಲಾತಿಗಳನ್ನು ಪರಿಶೀಲಿಸಿ ಪರಿಹಾರ ನೀಡಲಾಗುತ್ತದೆ ಎಂದರು.

ಉಪ ವಿಭಾಗಾಧಿಕಾರಿ ಡಾ|| ನವೀನ್ ಭಟ್ ಅವರು ಮಾತನಾಡಿ ನೇರ ಖರೀದಿಗೆ ಒಪ್ಪಿಗೆ ಸೂಚಿಸಿರುವ ರೈತರ ಜಮೀನನ್ನು ಪುನಹ ಸರ್ವೆ ಮಾಡಿ ಪರಿಹಾರ ನೀಡಲಾಗುತ್ತದೆ ಎಂದರು.

ಅರಣ್ಯ ಇಲಾಖೆಯವರು ಅಕ್ಟೋಬರ್ ಮಾಹೆಯಿಂದ ಡಿಸೆಂಬರ್ ತಿಂಗಳಿನವರೆಗೆ ಗಣಿಗಾರಿಕೆ ಮಾಡುವಂತಿಲ್ಲ ಎಂದು ಸೂಚಿಸಿದ್ದರೂ ಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿವೆ ಇದರಿಂದ ರಸ್ತೆಗಳು ಹಾಳಾಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಹಾಗಾಗಿ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದರು.

ಆಲೂರು, ಸಕಲೇಶಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಹೋಬಳಿವಾರು ಗ್ರಾಮಗಳ ಗದ್ದೆ, ತೋಟ, ಕಾಫಿ ಎಸ್ಟೇಟ್‍ಗಳಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗುತ್ತಿದೆ ಹಾಗಾಗಿ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡುವಂತೆ ಮನವಿ ಮಾಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರುಗಳು ಸಭೆಯಲ್ಲಿ ಹಾಜರಿದ್ದರು.

Post a Comment

0 Comments